ಶಿವಮೊಗ್ಗ : ಮಧ್ಯಪ್ರಾಚ್ಯದಲ್ಲಿ ಯುದ್ಧದ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಅರಬ್ ರಾಷ್ಟ್ರಗಳಲ್ಲಿ ಉದ್ಯೋಗ ಮತ್ತು ಪ್ರವಾಸಕ್ಕಾಗಿ ತೆರಳಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೊಡ್ಡ ಭರವಸೆ ನೀಡಿದ್ದಾರೆ. “ಪ್ರತಿಯೊಬ್ಬ ಕನ್ನಡಿಗನನ್ನು ಸುರಕ್ಷಿತವಾಗಿ ನಾಡಿಗೆ ಕರೆತರುವುದು ನಮ್ಮ ಜವಾಬ್ದಾರಿ” ಎಂದು ಅವರು ತಿಳಿಸಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾಗಿರುವ ತುರ್ತು ಪರಿಸ್ಥಿತಿಯ ಬಗ್ಗೆ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದರು.
ವಿದೇಶಾಂಗ ಇಲಾಖೆಯೊಂದಿಗೆ ನಿರಂತರ ಸಂಪರ್ಕ : ಅರಬ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರನ್ನು ತಾಯ್ನಾಡಿಗೆ ಕರೆತರಲು ರಾಜ್ಯ ಸರ್ಕಾರವು ಕೇಂದ್ರ ವಿದೇಶಾಂಗ ಸಚಿವಾಲಯದೊಂದಿಗೆ (MEA) ನಿರಂತರ ಸಂಪರ್ಕದಲ್ಲಿದೆ. ಮುಖ್ಯ ಕಾರ್ಯದರ್ಶಿಗಳು ಮತ್ತು ದೆಹಲಿಯಲ್ಲಿರುವ ಕರ್ನಾಟಕದ ಸ್ಥಾನಿಕ ಆಯುಕ್ತರಿಗೆ ಈ ಬಗ್ಗೆ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಸಿಎಂ ವಿವರಿಸಿದರು.
ದುಬೈ ಏರ್ಪೋರ್ಟ್ ತೆರೆದ ತಕ್ಷಣ ರಕ್ಷಣಾ ಕಾರ್ಯಾಚರಣೆ : ಸದ್ಯದ ಯುದ್ಧದ ಪರಿಸ್ಥಿತಿಯಿಂದಾಗಿ ದುಬೈ ವಿಮಾನ ನಿಲ್ದಾಣವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ವಿಮಾನ ನಿಲ್ದಾಣ ಪುನಾರಂಭಗೊಂಡ ತಕ್ಷಣವೇ ವಿಶೇಷ ವ್ಯವಸ್ಥೆ ಮೂಲಕ ಕನ್ನಡಿಗರನ್ನು ಕರೆತರಲಾಗುವುದು. ಇದೇ ವೇಳೆ, ದುಬೈನಲ್ಲಿರುವ ವಿಧಾನ ಪರಿಷತ್ ಸದಸ್ಯ ಭೋಜೇಗೌಡರೊಂದಿಗೆ ಫೋನ್ ಮೂಲಕ ಮಾತನಾಡಿದ್ದು, ಅವರು ಹೋಟೆಲ್ನಲ್ಲಿ ಸುರಕ್ಷಿತವಾಗಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದರು.
ಗೃಹಬಳಕೆದಾರರಿಗೆ ನೆಮ್ಮದಿಯ ಸುದ್ದಿ: ವಿದ್ಯುತ್ ದರ ಏರಿಕೆ ಇಲ್ಲ! ಇದೇ ವೇಳೆ ಏಪ್ರಿಲ್ನಿಂದ ವಿದ್ಯುತ್ ದರ ಏರಿಕೆಯಾಗಲಿದೆ ಎಂಬ ವದಂತಿಗಳಿಗೆ ಸಿಎಂ ಪೂರ್ಣವಿರಾಮ ಇಟ್ಟಿದ್ದಾರೆ. “ಸದ್ಯಕ್ಕೆ ವಿದ್ಯುತ್ ದರ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ” ಎಂದು ಸ್ಪಷ್ಟಪಡಿಸುವ ಮೂಲಕ ಜನಸಾಮಾನ್ಯರಿಗೆ ಬಿಗ್ ರಿಲೀಫ್ ನೀಡಿದ್ದಾರೆ.