ಬಳ್ಳಾರಿ: ಸಮಾಜದ ಪ್ರತಿ ಮಗುವಿಗೂ ಮೂಲಭೂತ ಸೌಲಭ್ಯ ಒದಗಿಸುವುದರ ಜೊತೆಗೆ ಅವರಿಗಿರುವ ಹಕ್ಕುಗಳ ರಕ್ಷಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಇದನ್ನು ಮಿಸ್ ಮಾಡದೇ ಓದಿ: ಉಳಿತಾಯ ಖಾತೆಯಿಂದ ಹಣ ಕಡಿತ : ಸೇವಾನ್ಯೂನ್ಯತೆ ಎಸಗಿದ ಕೆನರಾ ಬ್ಯಾಂಕಿಗೆ ದಂಡ
ಇದನ್ನು ಮಿಸ್ ಮಾಡದೇ ಓದಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ: ಸಾಧನೆ ಯೋಜನೆಯಡಿ ಅರ್ಜಿ ಆಹ್ವಾನ
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ಹಕ್ಕುಗಳ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ವಿಕಲಚೇತನರ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಗ್ರಾಮೀಣ ಮತ್ತು ನಗರ ಪುನರ್ವಸತಿ ಕಾರ್ಯಕರ್ತರಿಗೆ ನಗರದ ಜಿಲ್ಲಾಡಳಿತ ಆವರಣದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಆಯೋಜಿಸಿದ್ದ ಮಕ್ಕಳ ರಕ್ಷಣೆ ವಿಷಯದ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಹಲವು ಯೋಜನೆಗಳನ್ನು ಜಾರಿಗೊಳಿಸಿ ಹೆಚ್ಚಿನ ಒತ್ತು ನೀಡುತ್ತಿದ್ದು, ಆದರೆ ಇತ್ತೀಚೆಗೆ ನಡೆಯುತ್ತಿರುವ ಮಕ್ಕಳ ದೌರ್ಜನ್ಯ ಸೇರಿದಂತೆ ಇನ್ನಿತರೆ ಅನೈತಿಕ ಚಟುವಟಿಕೆಗಳಿಗೆ ಮಕ್ಕಳನ್ನು ಬಳಸಿಕೊಳ್ಳುತ್ತಿರುವುದು ವಿಷಾಧನೀಯ ಸಂಗತಿಯಾಗಿದೆ. ಇಂತಹ ದೌರ್ಜನ್ಯ ಮತ್ತು ಶೋಷಣೆಗಳನ್ನು ತಡೆಗಟ್ಟಲು ನಾವೆಲ್ಲರೂ ಕೈ ಜೋಡಿಸಬೇಕು ಎಂದರು.
ಸಮಾಜದ ಪೀಡಗು ಆಗಿರುವ ಬಾಲ್ಯವಿವಾಹ ಪ್ರಕರಣಗಳು ಸಹ ಹೆಚ್ಚಾಗಿ ಕಂಡುಬರುತ್ತಿದ್ದು, ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪೋಷಕರಿಗೆ ಅರಿವು ಮೂಡಿಸಬೇಕು. ಮಕ್ಕಳಿಗೆ ಸರಿಯಾದ ಶಿಕ್ಷಣ ನೀಡಿ ಮುಖ್ಯವಾಹಿನಿಗೆ ತರಬೇಕು. ಬಡತನ ಹಿನ್ನೆಲೆ ಹೊಂದಿರುವ ಕುಟುಂಬಗಳಲ್ಲಿ ಹೆಚ್ಚಿನ ಮಕ್ಕಳು ಶಾಲೆ ಬಿಟ್ಟು ಕೆಲಸಕ್ಕೆ ಹೋಗುವುದು, ಬಾಲ್ಯವಿವಾಹ ಸೇರಿದಂತೆ ಇನ್ನಿತರೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಂತಹ ಪ್ರದೇಶಗಳಲ್ಲಿ ಪೋಷಕರಿಗೆ ಮಕ್ಕಳ ರಕ್ಷಣೆ ಮತ್ತು ಹಕ್ಕುಗಳ ಬಗ್ಗೆ ಹೆಚ್ಚಿನ ಅರಿವು ಮೂಡಿಸುವ ಕೆಲಸವಾಗಬೇಕಿದೆ ಎಂದು ಹೇಳಿದರು.

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಗೋವಿಂದಪ್ಪ ಹೆಚ್.ಎಂ ಅವರು ಮಾತನಾಡಿ, ಪ್ರತಿಯೊಬ್ಬರೂ ಮಗು ಜನಿಸಿದ ಮತ್ತು ನಂತರ ಸಂದರ್ಭದಲ್ಲಿ ಅಂಗವಿಕಲತೆ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸಿ ಮುನ್ನೆಚ್ಚರಿಕೆ ವಹಿಸಿದರೆ ಅಂಗವಿಕಲತೆಯನ್ನು ತಡೆಗಟ್ಟಬಹುದು. ಸಮಾಜದಲ್ಲಿ ಕಣ್ಣಿಗೆ ಕಾಣುವ ಮತ್ತು ಕಾಣಿಸದೇ ಇರುವ ವಿವಿಧ ಅಂಗವಿಕಲತೆ ಹೊಂದಿದ ಜನರು ಇದ್ದಾರೆ. ಇವುಗಳ ಬಗ್ಗೆ ಪೋಷಕರಿಗೆ ಹೆಚ್ಚಿನ ಅರಿವು ಮೂಡಿಸಿ ಜಾಗೃತಿಗೊಳಿಸಬೇಕು ಎಂದರು.
ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತ್ರಿವೇಣಿ ಪತ್ತಾರ್ ಅವರು ಮಾತನಾಡಿ, ಮಕ್ಕಳು ದೇಶದ ಭವಿಷ್ಯ, ಅವರಿಗೆ ಶಿಕ್ಷಣ, ರಕ್ಷಣೆ, ಮೂಲಭೂತ ಸೌಲಭ್ಯ ಒದಗಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ ಇನ್ನಿತರೆ ವಿಷಯಗಳು ಮಕ್ಕಳ ಮೇಲೆ ದೈಹಿಕ ಮತ್ತು ಮಾನಸಿಕವಾಗಿ ಪರಿಣಾಮ ಬೀರುತ್ತಿದ್ದು, ಮಕ್ಕಳ ರಕ್ಷಣೆ ಮಾಡುವುದು ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಮಕ್ಕಳು ಹೆಚ್ಚಾಗಿ ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದು, ಹದಿಹರಿಯದವರು ಪ್ರೀತಿ-ಪ್ರೇಮದ ಬಲೆಗೆ ಬೀಳುತ್ತಿದ್ದಾರೆ. ಹಾಗಾಗಿ ಪೋಷಕರು ಮಕ್ಕಳ ಮೇಲೆ ಹೆಚ್ಚಿನ ಗಮನ ವಹಿಸಬೇಕು ಎಂದರು.
ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ರಕ್ಷಣಾಧಿಕಾರಿ ಸುಭದ್ರಾದೇವಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳನ್ನು ಅನೈತಿಕ ಚಟುವಟಿಕೆಗಳಲ್ಲಿ ಬಳಸಿಕೊಳ್ಳುವುದು ಅಪರಾಧವಾಗಿದೆ. ಮಕ್ಕಳ ರಕ್ಷಣೆ ಬಗ್ಗೆ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಮಕ್ಕಳ ಸ್ಥಿತಿ-ಗತಿಗಳು, ಸಮಸ್ಯೆಗಳ ಬಗ್ಗೆ ವರದಿ ಮಾಡಿ ಮೇಲಾಧಿಕಾರಿಗಳಿಗೆ ತಿಳಿಸಬೇಕು ಹಾಗೂ ಪ್ರತಿ ಗ್ರಾಮ ಪಂಚಾಯತಿಗಳಲ್ಲಿ ಮಕ್ಕಳ ಗ್ರಾಮ ಸಭೆ ನಡೆಸಿ ಮಕ್ಕಳಿಗೆ ಅವರ ಹಕ್ಕುಗಳು, ಮೂಲಭೂತ ಸೌಲಭ್ಯಗಳ ಬಗ್ಗೆ ತಿಳಿಸಬೇಕು ಎಂದರು.
ಮಕ್ಕಳ ವಿಶೇಷ ಪೊಲೀಸ್ ಘಟಕದ ರೆಷ್ಮಾ ಅವರು ಡಿಜಿಟಲ್ ಅರೆಸ್ಟ್ ಮತ್ತು ಸೈಬರ್ ಕ್ರೆöÊಂ ಬಗ್ಗೆ ವಿವರವಾಗಿ ತಿಳಿಸಿದರು.ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯ ಡಾ.ಹೆಚ್.ಸಿ ರಾಘವೇಂದ್ರ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಮಕ್ಕಳ ರಕ್ಷಣೆ ವಿಷಯದ ಕುರಿತು ಸವಿವರವಾಗಿ ತಿಳಿಸಿಕೊಟ್ಟರು.ಇದೇ ವೇಳೆ ನ್ಯಾ.ರಾಜೇಶ್ ಎನ್.ಹೊಸಮನೆ ಅವರು ರಸ್ತೆ ಸುರಕ್ಷತಾ ಸಪ್ತಾಹದ ಬಗ್ಗೆ ವಿವರಿಸಿ, ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಎಫ್.ಗೌಸಿಯಾ, ಚಟ್ಲ ವೆಂಕಟೇಶ್, ಜಿಲ್ಲಾ ನಿರೂಪಣಾಧಿಕಾರಿ ಸವಿತಾ, ಸಿಬ್ಬಂದಿಗಳಾದ ಚನ್ನಬಸಪ್ಪ, ಮಂಜುನಾಥ, ಈಶ್ವರ್ ರಾವ್, ಹೊನ್ನುರಪ್ಪ ಸೇರಿದಂತೆ ವಿವಿಧ ಕಾರ್ಯಕರ್ತರು ಇತರರು ಉಪಸ್ಥಿತರಿದ್ದರು.
Protection of children’s rights is our responsibility Dr. Rajesh N. Hosamane













Follow Me