ಬೆಂಗಳೂರು : ಜನತೆಯಲ್ಲಿ ಕ್ಯಾನ್ಸರ್ ಕುರಿತು ಜಾಗೃತಿ ಮೂಡಿಸುವ ಜಾಥಾಗಳಿಗೆ ಎಲ್ಲಾ ಶಾಸಕರ ಪ್ರೋತ್ಸಾಹ ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ತಿಳಿಸಿದರು.
ಅವರು ಬುಧವಾರ ಬೆಂಗಳೂರಿನಲ್ಲಿ ವಿಶ್ವಕ್ಯಾನ್ಸರ್ ದಿನದ ಅಂಗವಾಗಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಿಂದ ಹಮ್ಮಿಕೊಳ್ಳಲಾದ ಕ್ಯಾನ್ಸರ್ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿ ವರ್ಷವೂ ವಿಶ್ವ ಕ್ಯಾನ್ಸರ್ ದಿನ ಅಚರಣೆ ಮಾಡಲಾಗುತ್ತದೆ. ಕ್ಯಾನ್ಸರ್ ನಿರ್ಮೂಲನೆಗಾಗಿ ಸರ್ಕಾರದೊಂದಿಗೆ ಸಂಘ ಸಂಸ್ಥೆಗಳು ಸಾಕಷ್ಟು ಪ್ರೋತ್ಸಾಹ ನೀಡುತ್ತಿವೆ. ಶಾಸಕರು ತಮ್ಮ ಕ್ಷೇತ್ರದಲ್ಲಿ ಜಾಥಾಗಳನ್ನು ಏರ್ಪಡಿಸುವ ಮೂಲಕ ಅರಿವು ಮೂಡಿಸಬೇಕೆಂದರು.
ಇದನ್ನು ಮಿಸ್ ಮಾಡದೇ ಓದಿ : ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಉಚಿತ ಭಾರೀ ವಾಹನ ಚಾಲನಾ ತರಬೇತಿ
ಸಾಮಾನ್ಯ ಮಾದರಿ ರಕ್ತ ಪರೀಕ್ಷೆಯಲ್ಲಿ ಕ್ಯಾನ್ಸರ್ ಪತ್ತೆ ಮಾಡುವ ಅಂಶ ಸೇರಿಸುವ ಮೂಲಕ ಪ್ಯಾಕೇಜ್ ರೀತಿ ಪರೀಕ್ಷೆ ಮಾಡಿದರೆ ಅನುಕೂಲವಾಗಲಿದೆ. ಎಲ್ಲಾ ರೋಗಗಳಿಗೂ ರಕ್ತ ಪರೀಕ್ಷೆ ಮಾಡುತ್ತಾರೆ. ಅದರಲ್ಲಿ ಕ್ಯಾನ್ಸರ್ ಅಂಶ ಪತ್ತೆ ಮಾಡುವ ಅಂಶ ಸೇರಿಸಿದರೆ ಮೂಲದಲ್ಲಿಯೇ ಕ್ಯಾನ್ಸರ್ ಪತ್ತೆಮಾಡಲು ಸಾಧ್ಯ. ಹಾಗೂ ಶೀಘ್ರದಲ್ಲೂ ಚಿಕಿತ್ಸೆ ಪಡೆದುಕೊಳ್ಳಬಹುದಾಗಿದೆ. ಉತ್ತಮ ಆಹಾರ, ವ್ಯಾಯಾಮದಿಂದ ಆರೋಗ್ಯ ಕಾಪಾಡಿಕೊಳ್ಳಬೇಕು. ಜನರು ಪ್ರತಿ ವರ್ಷವೂ ಸ್ವಯಂ ಪ್ರೇರಿತವಾಗಿ ವೈದ್ಯಕೀಯ ತಪಾಸಣೆಗೆ ಒಳಗಾಗಬೇಕು ಎಂದು ತಿಳಿಸಿದರು.

ಜನರಿಗೆ ಸದಾಕಾಲ ಕ್ಯಾನ್ಸರ್ ಜಾಗೃತಿ ಮೂಡಿಸುವ ಆಸ್ಪತ್ರೆ ಕಿದ್ವಾಯಿ. ದೇಶದಲ್ಲೇ ಅತ್ಯುತ್ತಮ ಆಸ್ಪತ್ರೆಯಾಗಿರುವ ಕಿದ್ವಾಯಿ ಆಸ್ಪತ್ರೆ ಬಡ ರೋಗಿಗಳ ಆಶಾಕಿರಣವಾಗಿದೆ. ಬೀದರ ಹುಬ್ಬಳ್ಳಿ, ಮೈಸೂರು, ತುಮಕೂರು ಸೇರಿದಂತೆ ಫೆರಿಫೆರಲ್ ಕ್ಯಾನ್ಸರ್ ಘಟಕಗಳನ್ನು ನಿರ್ಮಿಸುವ ಮೂಲಕ ರಾಜ್ಯಾದ್ಯಂತ ವಿಸ್ತರಿಸಲಾಗುತ್ತಿದೆ. ಕಿದ್ವಾಯಿ ಆಸ್ಪತ್ರೆಯ ವೈದ್ಯರು ಮಾನವೀಯತೆಯಿಂದ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.
ಕ್ಯಾನ್ಸರ್ ಭಯ ಬೇಡ, ಜಾಗೃತಿ ಇರಲಿ: ಕಿದ್ವಾಯಿ ಸಂಸ್ಥೆಯ ನಿರ್ದೇಶಕ ಡಾ.ಟಿ.ನವೀನ್ : ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಿಂದ ಕ್ಯಾನ್ಸರ್ ತಪಾಸಣಾ ಮತ್ತು ಜಾಗೃತಿ ಕಾರ್ಯಕ್ರಮ ಆಯೋಜಿಸುವ ಮೂಲಕ ಜನತೆಯಲ್ಲಿ ಅರಿವು ಮೂಡಿಸಲಾಗುತ್ತಿದೆ. ರೋಗಿಗಳಿಗೆ ವಿಶ್ವದರ್ಜೆಯ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ ರೋಗಿಗಳ ಆರೈಕೆ ಮತ್ತು ಚಿಕಿತ್ಸೆಯಲ್ಲಿ ಈ ಸಂಸ್ಥೆಯು ಮುಂಚೂಣಿಯಲ್ಲಿದೆ. ಕ್ಯಾನ್ಸರ್ ಬಗ್ಗೆ ಯಾವುದೇ ಭಯ ಬೇಡ. ಆರಂಭಿಕ ಹಂತದಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಗಾಗುವ ಮೂಲಕ ಕ್ಯಾನ್ಸರ್ ರೋಗದಿಂದ ಮುಕ್ತವಾಗಬಹುದು. ಆಸ್ಪತ್ರೆಯಲ್ಲಿ ಅತ್ಯಾಧುನಿಕ ಸೌಲಭ್ಯ ಅಳವಡಿಸಿಕೊಳ್ಳುವ ಮೂಲಕ ಕ್ಯಾನ್ಸರ್ ರೋಗಿಗಳಿಗೆ ಪೂರಕವಾದ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ಹಂತದಲ್ಲಿ ಕ್ಯಾನ್ಸರ್ ಪತ್ತೆ ಮಾಡಿದರೆ ರೋಗಿಯು ಶೀಘ್ರ ಗುಣಮುಖವಾಗಬಹುದು ಎಂದು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರಾದ ಡಾ.ಟಿ.ನವೀನ್ ತಿಳಿಸಿದ್ದಾರೆ.
ಕನ್ನಡ ಚಲನಚಿತ್ರ ನಟ ರಮೇಶ್ ಭಟ್ ಮಾತನಾಡಿ, ಸಾಮಾನ್ಯ ಜನರಿಗೆ ಶ್ರೀಮಂತ ಕಾಯಿಲೆ ಕ್ಯಾನ್ಸರ್. ಈ ಕಾಯಿಲೆ ಬಗ್ಗೆ ಜನತೆಯಲ್ಲಿ ಜಾಗೃತಿ ಮೂಡಿಸುವುದು ಅಗತ್ಯ. ಕಿದ್ವಾಯಿ ಕಾರ್ಪೊರೇಟ್ ಆಸ್ಪತ್ರೆಗೂ ಮೀರಿ ಬೆಳೆದಿರುವ ಸರಕಾರಿ ಆಸ್ಪತ್ರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕ್ಯಾನ್ಸರ್ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿರುವ ಕಿದ್ವಾಯಿ ಆಸ್ಪತ್ರೆಯ ವೈದ್ಯರು, ಶುಶ್ರೂಷಕರು ಹಾಗೂ ಸಿಬ್ಬಂದಿಗಳಿಗೆ ಶ್ಲಾಘನೀಯ ಎಂದರು.
ಜಾಥಾ ಕಾರ್ಯಕ್ರಮದಲ್ಲಿ ಸಾವಿರಕ್ಕೂ ಹೆಚ್ಚು ನಸಿರ್ಂಗ್ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದರು. ಶುಶ್ರೂಷ ಪರಿಷತ್ತಿನ ಕುಲಸಚಿವ ಕೆ.ಮಲ್ಲು, ಸಂಸ್ಥೆಯ ವೈದ್ಯರಾದ ಡಾ.ಸುರೇಶ್ ಬಾಬು, ಡಾ.ಮಹಾಂತೇಶ್, ಡಾ.ವಿಜಯ್, ಡಾ.ಅರುಣ್ ಕುಮಾರ್ ಸೇರಿದಂತೆ ಜಾಥಾದಲ್ಲಿ ಮತ್ತಿರರರು ಭಾಗವಹಿಸಿದ್ದರು.
MLAs’ encouragement is important for cancer awareness marches: Umashree