ಬೆಂಗಳೂರು: ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಪ್ರಮುಖ ಸರ್ಜರಿ ಮಾಡಿದ್ದು, ಕರ್ನಾಟಕ ಆಡಳಿತ ಸೇವೆಯ (ಕೆ.ಎ.ಎಸ್) ಹಿರಿಯ ಮತ್ತು ಕಿರಿಯ ಶ್ರೇಣಿಯ ಒಟ್ಟು 23 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮುಂಬರುವ 2026ರ ವಿಧಾನಸಭಾ ಉಪಚುನಾವಣೆಗಳ ಹಿನ್ನೆಲೆಯಲ್ಲಿ, ಚುನಾವಣಾ ಆಯೋಗದ ಕಟ್ಟುನಿಟ್ಟಿನ ಮಾರ್ಗಸೂಚಿಗಳು ಹಾಗೂ ಸಾರ್ವಜನಿಕ ಆಡಳಿತ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್) ತಿಳಿಸಿದೆ.
ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಶಿವಕುಮಾರ್ ಕೆ.ಬಿ. ಅವರು ಜುಲೈ 1, 2026 ರಂದು ಈ ಪ್ರಮುಖ ಆದೇಶಕ್ಕೆ ಸಹಿ ಹಾಕಿದ್ದಾರೆ.
ವರ್ಗಾವಣೆಗೊಂಡಿರುವ ಎಲ್ಲಾ ಅಧಿಕಾರಿಗಳು ಯಾವುದೇ ತರಹದ ವಿಳಂಬಕ್ಕೆ ಆಸ್ಪದ ನೀಡದೆ ತಕ್ಷಣವೇ ತಮ್ಮ ನೂತನ ಹುದ್ದೆಗಳಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕು. ವರದಿ ಮಾಡಿಕೊಂಡ ತಕ್ಷಣವೇ ಸಿಸಿಟಿಸಿ (CTC) ಪ್ರತಿಯನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಿಕೊಡಬೇಕು ಎಂದು ಸರ್ಕಾರದ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ಈ ಆದೇಶದ ಪ್ರತಿಯನ್ನು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ರವಾನಿಸಲಾಗಿದೆ.




