ಬೆಂಗಳೂರು: ಕಳೆದ ಎರಡು ಮೂರು ದಿನಗಳಿಂದ ಸುರಿದ ಅಕಾಲಿಕ ಮಳೆಯಿಂದಾಗಿ ತಂಪಾದ ವಾತಾವರಣ ಅನುಭವಿಸಿದ್ದ ಜನರಿಗೆ ಇದೀಗ ಮತ್ತೆ ಬಿಸಿಲಿನ ಬಿಸಿ ತಟ್ಟಲಿದೆ. ರಾಜ್ಯದಲ್ಲಿ ಮಳೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದ್ದು, ಮುಂದಿನ ಒಂದು ವಾರಗಳ ಕಾಲ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 7 ದಿನಗಳ ಹವಾಮಾನ ಮುನ್ಸೂಚನೆ
ಫೆಬ್ರವರಿ 27 ರಿಂದ ಮಾರ್ಚ್ 05 ರವರೆಗೆ ರಾಜ್ಯದಾದ್ಯಂತ ಹವಾಮಾನದಲ್ಲಿ ಗಣನೀಯ ಬದಲಾವಣೆ ಕಂಡುಬರಲಿದೆ. ಈ ಅವಧಿಯಲ್ಲಿ ಯಾವುದೇ ಮಳೆಯ ಮುನ್ಸೂಚನೆ ಇಲ್ಲದ ಕಾರಣ, ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.
ಇದನ್ನು ಓದಿ : ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ: 56 ಸಾವಿರ ಹುದ್ದೆಗಳ ಭರ್ತಿಗೆ ಗ್ರೀನ್ ಸಿಗ್ನಲ್ ನೀಡಿದ ಪರಮೇಶ್ವರ್!
ಕರಾವಳಿ ಕರ್ನಾಟಕ: ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ತಾಪಮಾನದಲ್ಲಿ ಸ್ಥಿರತೆ ಕಂಡುಬರಲಿದೆ.
ಉತ್ತರ ಒಳನಾಡು: ಇಲ್ಲಿನ ಜಿಲ್ಲೆಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಾಗಲಿದ್ದು, ಜನಜೀವನದ ಮೇಲೆ ಪರಿಣಾಮ ಬೀರಬಹುದು.
ದಕ್ಷಿಣ ಒಳನಾಡು: ಮೈಸೂರು, ಮಂಡ್ಯ ಸೇರಿದಂತೆ ದಕ್ಷಿಣದ ಜಿಲ್ಲೆಗಳಲ್ಲಿ ಸಹ ಒಣ ಹವೆಯೇ ಇರಲಿದೆ.
ಬೆಂಗಳೂರಿನಲ್ಲಿ ಹೇಗಿರಲಿದೆ ಹವಾಮಾನ?
ರಾಜಧಾನಿ ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದ್ದರೂ, ಮಳೆಯ ಸಂಭವ ಕಡಿಮೆ. ಮಧ್ಯಾಹ್ನ ಮತ್ತು ಸಂಜೆ ವೇಳೆ ಮೋಡಗಳು ಕಾಣಿಸಿಕೊಳ್ಳಬಹುದು. ಬೆಳಗಿನ ಜಾವ ಕೆಲವು ಪ್ರದೇಶಗಳಲ್ಲಿ ಮಂಜು ಮುಸುಕಿದ ವಾತಾವರಣ ಇರಲಿದೆ. ನಗರದ ಗರಿಷ್ಠ ತಾಪಮಾನ 31°C ಮತ್ತು ಕನಿಷ್ಠ ತಾಪಮಾನ 20°C ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ. ತಾಪಮಾನ ಏರಿಕೆಯ ಆತಂಕ
ಹವಾಮಾನ ಇಲಾಖೆಯ ಅಂಕಿಅಂಶಗಳ ಪ್ರಕಾರ, ಕರ್ನಾಟಕದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 3.1°C ನಿಂದ 5.0°C ವರೆಗೆ ಏರಿಕೆಯಾಗಿದೆ. ದಕ್ಷಿಣ ಒಳನಾಡಿನಲ್ಲಿಯೂ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ದಾಖಲಾಗುತ್ತಿದೆ.
ಗಮನಿಸಿ: ಮುಂದಿನ ಎರಡು ದಿನಗಳ ಕಾಲ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇಲ್ಲದಿದ್ದರೂ, ಅದರ ನಂತರದ ದಿನಗಳಲ್ಲಿ ತಾಪಮಾನವು ದಿಢೀರ್ ಏರಿಕೆಯಾಗಲಿದೆ. ಇದರಿಂದಾಗಿ ಮಧ್ಯಾಹ್ನದ ಹೊತ್ತು ಮನೆಯಿಂದ ಹೊರಬರುವಾಗ ಎಚ್ಚರ ವಹಿಸುವುದು ಉತ್ತಮ.